Monday, November 21, 2011

ಕೆಲವು ವಚನಗಳು

(೧)
ಕಾಗೆ ಕರುಬಿ ಮಾವಿನ ಚಿಗುರುಂಬೊಡೆ
ಬಾಯಿ ಕಹಿಗೊಂಡಿತ್ತಲ್ಲದೆ
ಕೋಗಿಲೆಯ ಸೊಲ್ಲು ದೊರಕೊಂಡಿತೇ
ಕಾಡ ಮಂಗ ಸಿರಿಗಂಧದ ಮರಕೆ ಜೋತೊಡದರ ನಡೆ ಸಿರಿಗೊಂಡಿತೇ?
ಭಾವದ ಮಿಂಚೊಡೆದ ಬೆಡಗಿಂಗೆ ಮೈಯಿಕ್ಕದೆ ಮನವೀಯದೆ
ಬರಿದೇ ನುಡಿನುಡಿಯೆಂದುರೆ ಬೊಬ್ಬೆ ಹೊಯ್ದೊಡೆ
ಆ ಬೊಬ್ಬೆ ನುಡಿಯೇ? ಹೊಯ್ದವ ನುಡಿಗನೇ? ನುಡಿ ಕನ್ನುಡಿಯೇ?
ನುಡಿಯೊಳನುಡಿತವ ಕೇಳದೆ ಮಿಡಿತವನರಿಯದೆ
ನಾನೀನೆಂದು ಗಳಹುವ ಬಾಯಿಬಡುಕರನೇನೆಂಬೆನಯ್ಯಾ
ದಮ್ಮಪುರದ ಮಂಜಯ್ಯಾ ನಿಮ್ಮ ನುಡಿಯೆಮಗೆ ಶರಣು.

(೨)
ಈ ನುಡಿ ಕನ್ನುಡಿಯೆಂಬರು
ಮತ್ತಾನುಡಿ ಪರನುಡಿಯೆಂಬರು,
ತೊದಲುವ ಕಂದನ ನುಡಿಯಾವುದಯ್ಯಾ
ಬಿರಿವೂವಿನ, ಚೆಲುನಗುವಿನ, ಎದೆಯೊಲವಿನ ನುಡಿಯಾವುದಯ್ಯಾ
ನುಡಿವುಟ್ಟುವ, ಹೊಮ್ಮುವ, ನೆಗೆಯುವ, ಚಿಮ್ಮುವ ಜೀವದ ನಡೆಯರಿಯದೆ,
ಪೆಣಕೆ ದಾರವನಿಕ್ಕಿ ಜಾತಿಯ ಹೊಲಸುಂಬರಯ್ಯಾ
ಅಯ್ಯಾ ನಿಮ್ಮ ಕರುಣೆಯದಾವ ನುಡಿ
ಕಡುಮೌನವದಾವ ನುಡಿ ಪೇಳಾ ದಮ್ಮಪುರದ ಮಂಜಯ್ಯಾ